ವಂದೇಮಾತರಂ ಸಂಪೂರ್ಣ ಚರಣ ಹಾಡಿದವರಿಗೆ ಕಾನೂನು ಕ್ರಮದ ಎಚ್ಚರಿಕೆ

ವಂದೇಮಾತರಂ ರಾಷ್ಟ್ರಗೀತೆ ಗಾಯನಕ್ಕೆ ಸಂಬಂಧಿಸಿದಂತೆ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ದೊಡ್ಡ ವಿವಾದವೊಂದು ಮುನ್ನೆಲೆಗೆ ಬಂದಿದೆ.

By ರಶ್ಮಿ ಎಸ್. | Rashmi S

1 min read

WhatsAppPost
vande mataram sampurna charana legal notice
vande mataram sampurna charana legal notice

ವಂದೇಮಾತರಂ ರಾಷ್ಟ್ರಗೀತೆ ಗಾಯನಕ್ಕೆ ಸಂಬಂಧಿಸಿದಂತೆ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ದೊಡ್ಡ ವಿವಾದವೊಂದು ಮುನ್ನೆಲೆಗೆ ಬಂದಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯ ಸಂಪೂರ್ಣ ಆರು ಚರಣಗಳನ್ನು ಹಾಡುವಂತಿಲ್ಲ, ಬದಲಿಗೆ ಕೇವಲ ಎರಡು ಚರಣಗಳನ್ನು ಮಾತ್ರ ಗಾಯನ ಮಾಡಬೇಕು ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಗಂಗಾವತಿಯಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮವೊಂದರಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಚರಣಗಳನ್ನು ಹಾಡಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಸರ್ಕಾರದ ಅಧಿಕೃತ ಆದೇಶವನ್ನು ಉಲ್ಲಂಘಿಸಿ ಸಂಪೂರ್ಣ ಚರಣಗಳನ್ನು ಹಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಸ್ಥಳೀಯ ಶಾಸಕ ಜನಾರ್ದನ ರೆಡ್ಡಿ ಅವರ ಒತ್ತಡಕ್ಕೆ ಮಣಿದು ಸಂಪೂರ್ಣ ಗೀತೆ ಹಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಸರ್ಕಾರದ ನಿಯಮಗಳು ಎಲ್ಲರಿಗೂ ಒಂದೇ ಆಗಿರುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವು ಇದೀಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಕೇಂದ್ರದ ಕಾರ್ಯಕ್ರಮಗಳಲ್ಲಿ ಆರೂ ಚರಣಗಳನ್ನು ಹಾಡಲು ಆದೇಶವಿದೆ. ಆದರೆ ರಾಜ್ಯ ಸರ್ಕಾರವು ಕೇವಲ ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿ ಜನಪ್ರತಿನಿಧಿಗಳು ವಿವಿಧ ಸಭೆ ಹಾಗೂ ಸಮಾರಂಭಗಳಲ್ಲಿ ಆರೂ ಚರಣಗಳನ್ನು ಹಾಡಲೇಬೇಕೆಂದು ಪಟ್ಟು ಹಿಡಿಯುತ್ತಿರುವುದರಿಂದ ಈ ವಿವಾದವು ದಿನದಿಂದ ದಿನಕ್ಕೆ ಮತ್ತಷ್ಟು ರಾಜಕೀಯ ರಂಗು ಪಡೆದುಕೊಳ್ಳುತ್ತಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಈ ಗದ್ದಲ ಸಾರ್ವಜನಿಕ ವಲಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ.

Topics

ಸಂಬಂಧಿತ ಸುದ್ದಿಗಳು