ಮಹಾಮಳೆಗೆ ಕರಾವಳಿ ತತ್ತರ : ಬಂಟ್ವಾಳ ಜಲಾವೃತ, ಪ್ರವಾಹ ಭೀತಿ

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಪ್ರವಾಹದ ತಲ್ಲಣ ಸೃಷ್ಟಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ.,

By ರಶ್ಮಿ ಎಸ್. | Rashmi S

1 min read

WhatsAppPost
bantwal floods nethravathi river danger level
bantwal floods nethravathi river danger level

ಮಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಪ್ರವಾಹದ ತಲ್ಲಣ ಸೃಷ್ಟಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ( Bantwal) ತಾಲೂಕಿನ ಹಲವು ಗ್ರಾಮಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ತೀರದ ನಿವಾಸಿಗಳು ತೀವ್ರ ಆತಂಕದಲ್ಲಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಜೊತೆಗೆ, ಎಎಂಆರ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.

ಇದರ ಪರಿಣಾಮವಾಗಿ ಪಾಣೆಮಂಗಳೂರು ಬಳಿಯ ಅಲಡ್ಕ, ಬೊಗೊಡಿ, ನಂದಾವರ ಹಾಗೂ ಕಂಚಿಕಾರಪೇಟೆ ಸೇರಿದಂತೆ ಹತ್ತಕ್ಕೂ ಹೆಚ್ಚು ತಗ್ಗು ಪ್ರದೇಶಗಳ ಅಂಗಡಿ ಮತ್ತು ಮನೆಗಳಿಗೆ ನೀರು ನುಗ್ಗಿದೆ. ಸ್ಥಳೀಯ ವರ್ತಕರು ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಹರಸಾಹಸ ಪಡುತ್ತಿದ್ದಾರೆ.

ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತದ ಸೂಚನೆಯಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಬೆಳ್ತಂಗಡಿಗೆ ಧಾವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಭಾಗದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಬೆಳ್ತಂಗಡಿ ತಾಲೂಕಿನ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಮತ್ತೊಂದೆಡೆ, ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಹರಿಸುವ ನೀರಿನ ಪ್ರಮಾಣವನ್ನು ಒಮ್ಮೆಲೇ 25,000 ಕ್ಯೂಸೆಕ್​​ಗೆ ಏರಿಸಲಾಗಿದೆ. ನದಿ ಪಾತ್ರದ ವಾಸಿಸುವ ನಿವಾಸಿಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಹೈ ಅಲರ್ಟ್‌ ಘೋಷಿಸಲಾಗಿದೆ.

ಇತ್ತ ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಗಾಳಿಯ ಆರ್ಭಟ ಜೋರಾಗಿದ್ದು, ಹೊಸನಗರ ತಾಲೂಕಿನ ಬರುವೆ ಗ್ರಾಮದ ಬಳಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ತರಕಾರಿ ವ್ಯಾಪಾರ ಮುಗಿಸಿ ಬರುತ್ತಿದ್ದ ಚಾಲಕ ತೌಸಿಫ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಪಂಚಾಯಿತಿ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

Topics

ಸಂಬಂಧಿತ ಸುದ್ದಿಗಳು