ಮಂಗಳೂರು : ಕಳೆದ ಕೆಲವು ದಿನಗಳಿಂದಲೂ ಧಾರಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದೆ. ಅಗಸ್ಟ್ 3ರಂದು ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಜಿಲ್ಲೆಯ ಮಂಗಳೂರು, ಉಪವಿಭಾಗ ಹಾಗೂ ಪುತ್ತೂರು ಉಪ ವಿಭಾಗದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಆದೇಶ ಹೊರಡಿಸಿದ್ದಾರೆ.
ಅಗಸ್ಟ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮೂಲ್ಕಿ, ಉಳ್ಳಾದಲ್ಲಿ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ವಸತಿ ಪ್ರೌಢ ಶಾಲೆ ಹಾಗೂ ಪತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ವಸತಿ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ವಸತಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳು ಮಳೆಯ ರಜೆಯನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಶಾಲೆ ರಜೆ ವಿಚಾರದಲ್ಲಿ ಗೊಂದಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಆದರೆ ಮಕ್ಕಳಿಗೆ ಶಾಲಾ ರಜೆಯ ವಿಚಾರದಲ್ಲಿ ಕೆಲವರು ಚೆಲ್ಲಾಟವಾಡುತ್ತಿದ್ದಾರೆ. ಜಿಲ್ಲಾಡಳಿತ ರಜೆ ಘೋಷಣೆಗೂ ಮೊದಲೇ ಜಿಲ್ಲಾಧಿಕಾರಿಗಳ ನಕಲಿ ಆದೇಶವನ್ನು ಹರಿಬಿಡುತ್ತಿದ್ದಾರೆ. ಈ ರೀತಿಯಾಗಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ರಣ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್ ಡ್ಯಾಮ್ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.
ಪಾಣೆ ಮಂಗಳೂರು ಬಳಿಯ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ, ಕಂಚಿಕಾರಪೇಟೆ, ಅಕ್ಕರಂಗಡಿ, ಬಸ್ತಿಪಡ್ಪು, ಜಕ್ರಿಬೆಟ್ಟು, ನಾವೂರು, ಅಜಿಲಮೊಗರು ಪ್ರದೇಶಗಳಲ್ಲಿ ಜನರ ಪರದಾಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ರಣಮಳೆ ಆರ್ಭಟಿಸುತ್ತಿದೆ. ನೋಡ ನೋಡುತ್ತಿದ್ದಂತೆಯೇ ಗುಡ್ಡಗಳು ಕುಸಿಯುತ್ತಿದ್ದು ಆತಂಕ ಸೃಷ್ಟಿಯಾಗಿದೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ತೋಟಕ್ಕೆ ನೀರು ನುಗ್ಗಿದೆ. ಬೆಳ್ತಂಗಡಿ, ಬಂಟ್ವಾಳ ಮಾತ್ರವಲ್ಲದೇ ಜಿಲ್ಲೆಯ ಪುತ್ತೂರು, ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆ ಕಂಢಿದೆ.
ನದಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು, ತೋಟಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿರುವ ಜನರ ರಕ್ಷಣೆಗಾಗಿ ಬೆಳ್ತಂಗಡಿ, ಉಜಿರೆ ಭಾಗದ ಕೆಲ ಪ್ರದೇಶಗಳಿಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ.
ಮಂಗಳೂರು ಗಡಿ ಭಾಗದ ಕೇರಳದ ಕಾಸರಗೋಡಿನಲ್ಲಿ ಜಲಪ್ರಳಯ ಉಂಟಾಗಿದೆ. ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಜಲದಿಗ್ಭಂದನವಾಗಿದೆ. ನೀಲೇಶ್ವರ ಸೇರಿ ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿದು ಪ್ರವಾಹ ಸ್ಥಿತಿ ಉಂಟಾಗಿದ್ದು, ಭಾರೀ ಮಳೆಗೆ ಅಂಗಡಿ, ಮನೆಗಳಿಗೆ ನೀರು ನುಗ್ಗಿ ಅಪಾಯದ ಸ್ಥಿತಿಯಲ್ಲಿದೆ.
ಸ್ಥಳೀಯಾಡಳಿತ ದೋಣಿಗಳಲ್ಲಿ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಫಲ್ಗುಣಿ ನದಿ ಉಕ್ಕಿ ಹರಿದು ಹಲವು ತೋಟಗಳಿಗೆ ನೀರು ನುಗಿದೆ. ಬೆಳ್ತಂಗಡಿಯ ಕಾಯರ್ತಡ್ಕ ಕಾಲಿವೆಟ್ಟು ಸೇತುವೆ ಮುಳುಗಡೆಯಾಗಿದ್ದು, ನದಿ ಉಕ್ಕಿ ಹರಿದ ಪರಿಣಾಮ ಸೇತುವೆ ಮುಳುಗಿ ವಾಹನ ಸಂಚಾರ ಬಂದ್ ಆಗಿದೆ.