Kannada News Next

udupi

ಕಾರ್ಕಳ: ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಕಲ್ಲಂಗಡಿ ಲಾರಿ ಪಲ್ಟಿ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಕಲ್ಲಂಗಡಿ ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಮಗುಚಿಬಿದ್ದು ಭೀಕರ ಅಪಘಾತ ಸಂಭವಿಸಿದೆ.

By Meghana Pranuth | ಮೇಘನಾ ಪ್ರಣೂತ್‌
WatermelonSpill

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಕಲ್ಲಂಗಡಿ ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಮಗುಚಿಬಿದ್ದು ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ಭರಕ್ಕೆ ಲಾರಿಯು ಸ್ಥಳೀಯ ಬಸ್ ನಿಲ್ದಾಣದ ಮುಂಭಾಗದಲ್ಲೇ ಪಲ್ಟಿಯಾಗಿದೆ. ಪರಿಣಾಮವಾಗಿ, ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯುದ್ದಕ್ಕೂ ಒಡೆದು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದರಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಜಖಂಗೊಂಡು, ಚಾಲಕರು ಪರದಾಡುವಂತಾಯಿತು.

ಲಾರಿ ಡಿಕ್ಕಿಯಾದ ರಭಸಕ್ಕೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಹಾನಿ ತಪ್ಪಿದ್ದಕ್ಕೆ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಸ್ಥಳೀಯರ ನೆರವಿನಿಂದ ರಸ್ತೆಯಲ್ಲಿ ಬಿದ್ದಿದ್ದ ಹಣ್ಣುಗಳು ಹಾಗೂ ಅಪಘಾತಕ್ಕೀಡಾದ ವಾಹನಗಳನ್ನು ಪಕ್ಕಕ್ಕೆ ಸರಿಸಿ, ಬ್ಲಾಕ್ ಆಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.