ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಕ್ಷೇತ್ರದ ಎರಡು ಪ್ರಮುಖ ಸೇತುವೆ ಹಾಗೂ ಕಾಲುಸಂಕಗಳ ನಿರ್ಮಾಣಕ್ಕಾಗಿ ಸರ್ಕಾರದಿಂದ 2.05 ಕೋಟಿ ರೂಪಾಯಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಾರ್ಕಳ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ದೊಡ್ಡ ಕೊಡುಗೆ ಸಿಕ್ಕಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹೆಬ್ರಿ ತಾಲೂಕಿನ ನಾಡ್ವಾಲು ಗ್ರಾಮದ ಬಡಾ ತಿಂಗಳೆ-ತಿಂಗಳ ಗರಡಿ ಬಳಿ ಹಾಗೂ ಕಾರ್ಕಳ ತಾಲೂಕಿನ ಇದು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರಲ್ ಬೆಟ್ಟು ಪೂಂಜಾಜೆ ಕಾವೆರಡ್ಕ ಎಂಬಲ್ಲಿ ಒಟ್ಟು 2.05 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸೇತುವೆ ಮತ್ತು ಕಾಲುಸಂಕಗಳು ನಿರ್ಮಾಣವಾಗಲಿವೆ.
ಈ ಭಾಗದ ಸೇತುವೆ ಮತ್ತು ಕಾಲುಸಂಕಗಳ ನಿರ್ಮಾಣಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ವಿ. ಸುನಿಲ್ ಕುಮಾರ್ ಸಂಬಂಧಪಟ್ಟ ಇಲಾಖೆಯ ಸಚಿವರಿಗೆ ಹಾಗೂ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದರು. ಶಾಸಕರ ಈ ಶ್ರಮಕ್ಕೆ ಸ್ಪಂದಿಸಿರುವ ಸರ್ಕಾರ, ತಕ್ಷಣವೇ 2.05 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ.
ಅನುದಾನ ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಲಾಖೆಯ ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಶೀಘ್ರದಲ್ಲೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಶಾಸಕರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಸ್ಥಳೀಯ ಗ್ರಾಮಸ್ಥರ ಸಂಚಾರ ಸಮಸ್ಯೆ ಬಗೆಹರಿಯಲಿದ್ದು, ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.