ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿಕೆಶಿಗೆ ಫಿಕ್ಸ್ : ನಾನು ಮೆಂಟಲಿ ಫಿಟ್ ಇದ್ದೇನೆ ಅಂದಿದ್ದೇಕೆ ಬಂಡೆ…!?
ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆಯ ಜೊತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ಬದಲಾಗುತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಆದರೆ ಬಿಹಾರ ಚುನಾವಣೆಯಲ್ಲಾದ ಸೋಲಿನ ಬಳಿಕ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನೂರು ಬಾರಿ ಯೋಚಿಸುವಂತಹ ಪರಿಸ್ಥಿತಿ ಎದುರಾಗಿದೆ. ಕೆಲವೇ ಕೆಲವು ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಂಡಿರುವ ಕಾಂಗ್ರೆಸ್ ಅದೂ ಕೈತಪ್ಪಿ ಹೋದರೆ ಎಂಬ ಭಯದಲ್ಲಿದೆ. ಹೀಗಾಗಿ ಹೊಸ ಪ್ರಯೋಗಗಳಿಗೆ ಕೈ ಹಾಕುವ ಧೈರ್ಯಕ್ಕೆ ಮುಂದಾಗುತ್ತಿಲ್ಲ.
ಈ ಎಲ್ಲದರ ನಡುವೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನನ್ನ ಮಾನಸಿಕ ಆರೋಗ್ಯ ಬಹಳ ಚೆನ್ನಾಗಿದೆ. ನಾನೇಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಧ್ಯಮದವರನ್ನೇ ಮರುಪ್ರಶ್ನಿಸಿದ್ದಾರೆ.
ನನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯ ಬಹಳ ಚೆನ್ನಾಗಿದೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಮಾಡಬೇಕಾದ ಕೆಲಸಗಳು ಇನ್ನೂ ಬಹಳಷ್ಟಿದೆ. ಹೀಗಿರುವಾಗ ನಾನೇಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಡಿಸೆಂಬರ್ ಒಳಗಾಗಿ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಅನಿವಾರ್ಯತೆ ಇರುವುದರಿಂದ ಖರ್ಗೆ ಸಾಹೇಬರ ಭೇಟಿಗೆ ತೆರಳಿದ್ದೇನೆ.
ಇದನ್ನೂ ಓದಿ: DK Shivakumar Book: ಡಿಕೆ ಶಿವಕುಮಾರ್ ಬರೆದ ಪುಸ್ತಕವನ್ನು ಬಿಡುಗಡೆಗೊಳಿಸಿದ ಸಿದ್ದರಾಮಯ್ಯ!
ಅಲ್ಲದೇ ಗಾಂಧಿ ಭಾರತ ಎಂಬ ಪುಸ್ತಕ ಕೂಡ ಬರೆದಿದ್ದೇನೆ. ಈ ಪುಸ್ತಕದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾದ ಮೇಲೆ ಏನೇನು ಆಯ್ತು ಎಂಬುದರ ಬಗ್ಗೆ ನನ್ನ ಅಭಿಪ್ರಾಯಗಳನ್ನು ಅಕ್ಷರ ರೂಪಕ್ಕೆ ಇಳಿಸಿದ್ದೇನೆ. ಇದೆಲ್ಲದರ ಬಗ್ಗೆ ಚರ್ಚೆ ನಡೆಸಲು ಖರ್ಗೆ ಸಾಹೇಬರನ್ನು ಭೇಟಿ ಮಾಡಿರುವೆ. ಇದರ ಜೊತೆಯಲ್ಲಿ ಸಂಸ್ಥಾಪಕರ ದಿನಾಚರಣೆಯ ತಯಾರಿ ಕೂಡ ನಡೆಸಬೇಕಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಇವೆಲ್ಲ ಕೆಲಸಗಳನ್ನು ಹಾಗೆಯೇ ಮುಂದುವರಿಸದೇ ಇಡಲಾಗಿತ್ತು. ಇದೀಗ ಮತ್ತೆ ಎಲ್ಲ ಕೆಲಸಗಳು ಮುನ್ನೆಲೆಗೆ ಬಂದಿದೆ. ಇಷ್ಟೆಲ್ಲ ಕೆಲಸ ಮಾಡಲು ಬಾಕಿ ಇರುವಾಗ ನಾನೇಕೆ ರಾಜೀನಾಮೆ ನೀಡಲಿ ಎಂದಿದ್ದಾರೆ.



