‘ಸಿಎಂ ಸ್ಥಾನದ ಬಗ್ಗೆ ಮಾತನಾಡಲು ಬಿಜೆಪಿ ನನ್ನ ಹೈಕಮಾಂಡ್​ ಅಲ್ಲ’ : ಸಿಎಂ ಸಿದ್ದರಾಮಯ್ಯ ಗುಡುಗು

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸೋಲುತ್ತಾರೆಂಬ ಭಯದಿಂದ ಸ್ವತಃ ಸಿಎಂ ಸಿದ್ದರಾಮಯ್ಯರೇ (CM Siddaramaiah) ಪ್ರಚಾರದ ಕಣಕ್ಕೆ ಇಳಿದಿದ್ದಾರೆ ಎಂದಿದ್ದ ಕೇಂದ್ರ ಸಚಿವ ವಿ.ಸೋಮಣ್ಣಗೆ ಸಿಎಂ ಸಿದ್ದರಾಮಯ್ಯ ಟಾಂಗ್​ ನೀಡಿದ್ದಾರೆ. ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ ಯಾರಾದರೂ ಇದ್ದರೆ ಅದು ವಿ.ಸೋಮಣ್ಣ ಎಂದು ತಿರುಗೇಟು ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ವಿ.ಸೋಮಣ್ಣ ಇದ್ದ ಕಡೆ ಸರ್ಕಾರದ ಕಡತ ಕೂಡ ಹೋಗುವುದಿಲ್ಲ. ದಾವಣಗೆರೆಯಲ್ಲಿಯೂ ಬಿಜೆಪಿ ಸೋಲುತ್ತದೆ ಎಂಬ ಭಯವಿದೆ. ಹೀಗಾಗಿ ಅವರು ಪ್ರಚಾರದ ಕಣಕ್ಕೆ ಇಳಿಯುವ ಗೋಜಿಗೆ ಹೋಗಿಲ್ಲ . ಅಲ್ಲದೇ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.ಅವರ ಮಾತಲ್ಲಿ ಎಂದಿಗೂ ಸತ್ಯ ಇರುವುದಿಲ್ಲ.ಈಗಂತೂ ಬಾಗಲಕೋಟೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭಯ ಹೆಚ್ಚಾಗಿದೆ. ಹೀಗಾಗಿಯೇ ಆ ಭಯದಲ್ಲಿ ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ. ಇದರಿಂದಾಗಿ ಬಿಜೆಪಿ ನಾಯಕರ ಮಾತುಗಳಿಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಟಾಂಗ್​ ನೀಡಿದ್ದಾರೆ .

ಇದು ಮಾತ್ರವಲ್ಲ; ಬಿಜೆಪಿಯವರಿಗೆ ಯಾವ ಮಟ್ಟಿಗೆ ದ್ವಂದ್ವ ನೀತಿ ಇದೆ ಎಂದರೆ ಇವರೇ ಪಕ್ಷದಿಂದ ಉಚ್ಛಾಟಿಸಿರುವ ಬಸನಗೌಡ ಪಾಟೀಲ್ ಯತ್ನಾಳ್​ರನ್ನೇ ಈಗ ಪ್ರಚಾರಕ್ಕೆ ಕರೆಯಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಎಂತಹ ಹೀನಾಯ ಸ್ಥಿತಿಯಲ್ಲಿದೆ ಅನ್ನೋದಕ್ಕೆ ಇದೊಂದು ಉದಾಹರಣೆ ಸಾಕು ಎಂದು ವ್ಯಂಗ್ಯವಾಡಿದ್ರು. ಅಲ್ಲದೇ ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆಗೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲುವು ಖಚಿತ. ಹೀಗಿರುವಾಗ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ 29ನೇ ಕಂತಿನ ಹಣ ಬಿಡುಗಡೆ: ನಿಮ್ಮ ಖಾತೆಗೆ ₹2,000 ಜಮೆಯಾಗಿಲ್ಲವೇ ? ಈ ತಪ್ಪು ಸರಿಪಡಿಸಿಕೊಳ್ಳಿ

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದರು. ಅಲ್ಲದೇ ಬಿಜೆಪಿಯವರು ಪದೇ ಪದೇ ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಾರೆ . ಮುಖ್ಯಮಂತ್ರಿ ಪದವಿ ಬಗ್ಗೆ ಮಾತನಾಡೋಕೆ ಅವರೇನು ನಮ್ಮ ಹೈಕಮಾಂಡ್​ ಖಂಡಿತ ಅಲ್ಲ. ರಾಹುಲ್​ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನಮ್ಮ ಹೈಕಮಾಂಡ್​ ಎಂದು ಸಿದ್ದರಾಮಯ್ಯ ಪುನರುಚ್ಛರಿಸಿದರು.
ರಾಜ್ಯ ಬಜೆಟ್​ನಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್​ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎಂಬ ಬಸನಗೌಡ ಪಾಟೀಲ್​ ಯತ್ನಾಳ್​ರ ಆರೋಪದ ಬಗ್ಗೆಯೂ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ, ಏಕೆ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ ? ಎಲ್ಲರಿಗೂ ಅನುದಾನ ನೀಡುವಂತೆ ಅಲ್ಪಸಂಖ್ಯಾತರಿಗೂ ನೀಡಿದ್ದೇವೆ. ಇದರಲ್ಲಿ ತಪ್ಪೇನಿದೆ ಎಂದು ಹೇಳಿದರು.

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಗಳನ್ನು ಹೆಚ್ಚಿಸಬೇಕು. ಅದರಲ್ಲಿ ಮಲತಾಯಿ ಧೋರಣೆ ಇರಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕಾರ್ಯ ಮಾಡಬಾರದು ಎಂದು ಹೇಳಿದರು.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories