ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತನ್ನನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
ಬಿಜೆಪಿ ಶಾಸಕಕಾಂಗ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಸಂಸದೀಯ ಮಂಡಳಿ ತನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿದ್ದಾರೆ. ತನ್ನ ಹೆಸರನ್ನು ಸೂಚಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರು ನನಗೆ ಆಶೀರ್ವಾದವನ್ನು ಮಾಡಿದ್ದಾರೆ. ಹಿರಿಯರ ಆಶೀರ್ವಾದವೇ ನನಗೆ ಬಲ. ಯಾವುದೇ ಷರತ್ತು ಇಲ್ಲದೇ ಮುಖ್ಯಮಂತ್ರಿಯ ಹುದ್ದೆಯನ್ನು ಸ್ವೀಕಾರ ಮಾಡುತ್ತಿದ್ದೇನೆ ಎಂದಿದ್ದಾರೆ.
ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತೇನೆ. ಪಕ್ಷದ ಹಿರಿಯರ ಆಶಯದಂತೆ ಕರ್ನಾಟಕ ರಾಜ್ಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡುತ್ತೇನೆ. ಕೊರೊನಾ ನಿರ್ವಹಣೆ, ನೆರೆ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೇವೆಯನ್ನು ಮಾಡುತ್ತೇನೆ. ಬಡವರ ಸಂಕಷ್ಟವನ್ನು ಆಲಿಸುವುದಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡುತ್ತೇನೆ ಎಂದಿದ್ದಾರೆ.
ಇನ್ನು ತನಗೆ ರಾಜ್ಯ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ರಾಜ್ಯದ ಬಿಜೆಪಿ ಶಾಸಕರು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಕರ್ನಾಟಕದ ಜನತೆಗೆ ಬಸವರಾಜ್ ಬೊಮ್ಮಾಯಿ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.