ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಹೈಕಮಾಂಡ್ ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಬಹಿರಂಗವಾದ ಸತ್ಯವೇನು?
ನಾಯಕತ್ವ ಬದಲಾವಣೆಯ ವದಂತಿಗಳ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಈ ಕುರಿತು ಪ್ರಮುಖ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆಗಳು ಮತ್ತೊಮ್ಮೆ ಮುಂಚೂಣಿಗೆ ಬಂದಿವೆ. ಇತ್ತೀಚೆಗೆ ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ಪ್ರಮುಖ ಸಾಂಸ್ಥಿಕ ಸಭೆ ಹಾಗೂ ಪಕ್ಷದ ಆಂತರಿಕ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಮತ್ತು ಪ್ರಮುಖ ವೀಕ್ಷಕರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದ ಮುಂದುವರಿಕೆ ಅಥವಾ ಹೊಸಬರ ಆಯ್ಕೆಯ ಸಾಧಕ-ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ ಎನ್ನಲಾಗಿದೆ.
ಆದರೆ, ನಾಯಕತ್ವ ಬದಲಾವಣೆಯ ವದಂತಿಗಳ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಈ ಕುರಿತು ಪ್ರಮುಖ ಸ್ಪಷ್ಟನೆ ನೀಡಿದ್ದಾರೆ.
“ವಿಜಯೇಂದ್ರ ಅವರ ಕಾರ್ಯಕ್ಷಮತೆಯ ಮೌಲ್ಯಮಾಪನಕ್ಕಾಗಿ ಈ ಸಭೆ ನಡೆದಿಲ್ಲ. ಬಿಜೆಪಿಯಲ್ಲಿ ನಾಯಕರ ಮೌಲ್ಯಮಾಪನ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಸದ್ಯಕ್ಕೆ ಪಕ್ಷವು ಬಲಿಷ್ಠ ನಾಯಕತ್ವವನ್ನು ಹೊಂದಿದೆ,” ಎಂದು ಹೇಳುವ ಮೂಲಕ ಸದ್ಯದ ಗೊಂದಲಗಳಿಗೆ ತೆರೆ ಎಳೆಯಲು ಯತ್ನಿಸಿದ್ದಾರೆ.
ಆದಾಗ್ಯೂ, ಮೇ 25ರ ನಂತರ ಪಕ್ಷದ ಸಂಘಟನೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಮತ್ತು ಪದಾಧಿಕಾರಿಗಳ ಪುನರ್ರಚನೆ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಚಿತ್ರದುರ್ಗದಲ್ಲಿ ನಡೆದ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ‘ಅಭಿಮಾನೋತ್ಸವ’ದ ಯಶಸ್ಸು ವಿಜಯೇಂದ್ರ ಅವರ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿದೆ ಎಂಬ ವಾದವೂ ಕೇಳಿಬರುತ್ತಿದ್ದು, ಹೈಕಮಾಂಡ್ ಸದ್ಯಕ್ಕೆ ಯಾವುದೇ ದೊಡ್ಡ ಮಟ್ಟದ ನಾಯಕತ್ವ ಬದಲಾವಣೆಗೆ ಕೈಹಾಕುವ ಸಾಧ್ಯತೆ ಕಡಿಮೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.



