ಕೊನೆಗೂ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸುವಲ್ಲಿ ಡಿಕೆಶಿ ಯಶಸ್ವಿ : ಮಹತ್ವದ ಚರ್ಚೆ
ಕಳೆದ 2-3 ತಿಂಗಳಿನಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಬಹಿರಂಗವಾಗಿಯೇ ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಲೇ ಇದ್ದಾರೆ. ಆದರೆ ವರಿಷ್ಠರು ಮಾತ್ರ ಡಿಸಿಎಂ ಡಿ.ಕೆ ಶಿವಕುಮಾರ್ ಕೈಗೆ ಸಿಗದೇ ಓಡಾಡಿಕೊಂಡಿದ್ದರು. ರಾಹುಲ್ ಗಾಂಧಿ ಭೇಟಿಗಾಗಿ ದೆಹಲಿ ಅಲೆದು ಅಲೆದು ಸುಸ್ತಾಗಿದ್ದ ಡಿ.ಕೆ ಶಿವಕುಮಾರ್ ಕೊನೆಗೂ ತಮ್ಮ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.
ದೆಹಲಿಗೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್ ಮೊದಲು ಆಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ನಡೆದ ಸಭೆಯಲ್ಲಿ ವರಿಷ್ಠರೊಂದಿಗೆ ಭಾಗಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ವೀಕ್ಷಕರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಡಿ.ಕೆ ಶಿವಕುಮಾರ್ ರಾಹುಲ್ ಗಾಂಧಿಯವರನ್ನು ಏಕಾಂಗಿಯಾಗಿ ಮೀಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರ ಜೊತೆ ಕೆಲವೇ ಕೆಲವು ನಿಮಿಷಗಳ ಕಾಲ ಏಕಾಂಗಿಯಾಗಿ ಡಿಕೆಶಿ ಮಾತುಕತೆ ನಡೆಸಿದ್ದರು. ಇದೀಗ ದೆಹಲಿ ಪ್ರವಾಸ ಕೈಗೊಂಡು ರಾಹುಲ್ ಗಾಂಧಿಯವರನ್ನು ಮತ್ತೆ ಭೇಟಿಯಾಗುವಲ್ಲಿ ಡಿಕೆಶಿ ಕೊನೆಗೂ ಸಕ್ಸಸ್ ಕಂಡಿದ್ದಾರೆ. ಈ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಡಿಕೆಶಿ ರಾಹುಲ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಮಾಜಿ ಸಚಿವ, ಹಿರಿಯ ರಾಜಕಾರಣಿ, ಶತಾಯುಷಿ ಭೀಮಣ್ಣ ಖಂಡ್ರೆ ವಿಧಿವಶ
ವನ್ ಟು ವನ್ ಮೀಟಿಂಗ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಆಸ್ಸಾಂ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದೇವೆ. ಈ ಬಾರಿ ಆಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಪಕ್ಕಾ ಎಂದಿದ್ದಾರೆ.



