ರಾಜ್ಯ ಸರ್ಕಾರದಿಂದ ಹಿಟ್ಲರ್ ಧೋರಣೆ; ಬಿವೈ ವಿಜಯೇಂದ್ರ ಆಕ್ರೋಶ
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು, ಜನಪ್ರತಿನಿಧಿಗಳನ್ನು ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವದ ಕರಾಳ ಅಣಕ ಹಾಗೂ ವಾಕ್ ಸ್ವಾತಂತ್ರ್ಯದ ದಮನವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಮೆಟ್ರೋ ದರ ಏರಿಕೆಯ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಜನವಿರೋಧಿ ಧೋರಣೆಯನ್ನು ವಿರೋಧಿಸಿ ಜನರ ಧ್ವನಿಯಾಗಿ ಪ್ರತಿಭಟಿಸುವುದು ಈ ಸರ್ಕಾರದಲ್ಲಿ ಅಪರಾಧವಾಗಿದೆ ಎಂದು ಕಿಡಿಕಾರಿದ ಅವರು, ಸರ್ಕಾರದ ಈ ನಡವಳಿಕೆಯನ್ನು ‘ಹಿಟ್ಲರ್ ಶಾಹಿ’ ಧೋರಣೆಗೆ ಹೋಲಿಸಿದ್ದಾರೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ಮೆಟ್ರೋ ದರ ಏರಿಕೆ ಸದ್ಯಕ್ಕೆ ತಡೆಹಿಡಿಯಲ್ಪಟ್ಟಿದ್ದರೂ, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ನಿಲ್ಲುತ್ತಿಲ್ಲ ಎಂದು ಅವರು ದೂರಿದ್ದಾರೆ.
ಜನರ ಆಕ್ರೋಶವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಪ್ರಜಾತಂತ್ರದ ಹಕ್ಕುಗಳನ್ನು ಎತ್ತಿಹಿಡಿಯಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬೀದಿಗೆ ಇಳಿಯುವುದು ಅನಿವಾರ್ಯವಾಗಲಿದೆ ಎಂದು ವಿಜಯೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಅಪಮಾನ, ದೂರು ದಾಖಲು
ಇನ್ನು ತಮ್ಮ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ ಅವರು, “ಜನಸಾಮಾನ್ಯರ ಮೇಲೆ ಮೆಟ್ರೋ ದರ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಭಟಿಸುವುದು ನಮ್ಮ ಹಕ್ಕು. ಜನರ ಧ್ವನಿಯನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಿ ನಮ್ಮನ್ನು ವಶಕ್ಕೆ ಪಡೆದಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಇಂತಹ ಬೆದರಿಕೆಗಳಿಗೆ ನಾವು ಅಂಜುವುದಿಲ್ಲ ಮತ್ತು ದರ ಏರಿಕೆ ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.
BY Vijayendra | Tejaswi Surya | Bengaluru Metro price hike



