ರಾಜ್ಯದಲ್ಲಿ ಸುರಿಯುತ್ತಿದೆ ಭಾರೀ ಮಳೆ : ಬೈಕ್‌ ಜೊತೆ ನೀರಿನಲ್ಲಿ ಕೊಚ್ಚಿ ಹೋದ ದಂಪತಿ

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬಳ್ಳಾರಿ, ವಿಜಯಪುರ, ವಿಜಯ ನಗರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55 ವರ್ಷ) ಹಾಗೂ ಸುಮಂಗಲಾ(48 ವರ್ಷ) ಸಾವಿಗೀಡಾದ ದಂಪತಿ. ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಮಧ್ಯದಲ್ಲಿ ಈ ಘಟನೆ ನಡೆದಿದೆ. ದಂಪತಿ ಬೈಕಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಸೇತುವೆಯಲ್ಲಿ ಬೈಕ್‌ ಆಯತಪ್ಪಿ ಹಳ್ಳಕ್ಕೆ ಬಿದ್ದು ಈ ಅವಘಡ ಸಂಭವಿಸಿದೆ.

ವಿಜಯಪುರದಲ್ಲಿಯೂ ಇಂದು ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಳೆಯ ಹಿನ್ನೆಲೆಯಲ್ಲಿ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಕೃಷಿ ಚಟುವಟಿಕೆಗೆ ಸಹಕಾರಿಯಾಗಲಿದೆ.

ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಒಂದೆರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಜುಲೈ ೧೦ರ ವರೆಗೂ ಕೂಡ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Comments are closed.