ನಿರುದ್ಯೋಗಿಗಳಿಗೆ ಬಂಪರ್ ಗಿಫ್ಟ್: 56,432 ಹುದ್ದೆಗಳ ನೇಮಕಾತಿಗೆ ಸಿಎಂ ಡಿ.ಕೆ. ಶಿವಕುಮಾರ್ ತುರ್ತು ಆದೇಶ!

ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಬರೋಬ್ಬರಿ 56,432 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಬರೋಬ್ಬರಿ 56,432 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಕ್ಷನ್ ಮೋಡ್‌ಗೆ ಇಳಿದಿರುವ ಡಿ.ಕೆ. ಶಿವಕುಮಾರ್ ಅವರು, ತಮ್ಮ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ಸರ್ಕಾರದ ಅವಧಿಯಿಂದ ತಾಂತ್ರಿಕ ಕಾರಣಗಳಿಂದ ನನೆಗುದಿಗೆ ಬಿದ್ದಿದ್ದ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಮರುಜೀವ ನೀಡಲಾಗಿದ್ದು, ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣವೇ ವ್ಯವಸ್ಥಿತ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸುವಂತೆ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ. ಹೀಗಾಗಿ 56,432 ಹುದ್ದೆಗಳ ನೇಮಕಾತಿಗೆ ಎದುರಾಗಿದ್ದ ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಿ, ತಕ್ಷಣವೇ ಚಾಲನೆ ನೀಡಲು ಸೂಚಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಸರ್ಕಾರದ ಈ ನಿರ್ಧಾರದಿಂದಾಗಿ ವರ್ಷಗಳಿಂದ ಸರ್ಕಾರಿ ನೌಕರಿಗಾಗಿ ಹಗಲಿರುಳು ಶ್ರಮಿಸುತ್ತಿದ್ದ ಲಕ್ಷಾಂತರ ಯುವಕ-ಯುವತಿಯರಲ್ಲಿ ಹೊಸ ಭರವಸೆ ಮೂಡಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.