ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರಿ ನೌಕರರ ಪಟ್ಟು : ರಾಜ್ಯ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ
ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎನ್ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುವಂತೆ ರಾಜ್ಯ ಸರಕಾರಿ ನೌಕರರ ಸಂಘವು ಪಟ್ಟು ಹಿಡಿದಿದೆ. ಖಾಲಿ ಇರುವ ಹುದ್ದೆಗಳಿಂದ ಸರ್ಕಾರದ ಖಜಾನೆಯಲ್ಲಿ ಹಣ ಉಳಿಯುತ್ತಿದೆ. ಇದೇ ಹಣವನ್ನು ಸರ್ಕಾರಿ ನೌಕರರ ಪಿಂಚಣಿಗೆ ಬಳಕೆ ಮಾಡುವಂತೆ ನೌಕರರ ಸಂಘ ಮನವಿ ಮಾಡಿದೆ.
ಸಮಿತಿ ಅಧ್ಯಕ್ಷರಾದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹಳೆಯ ಪಿಂಚಣಿ ಯೋಜನೆಯನ್ನೇ ಮರುಜಾರಿಗೊಳಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಲು ಪೂರಕವಾದ ದಾಖಲೆ, ಮಾಹಿತಿ ಸಲ್ಲಿಸಿದ್ದಾರೆ.
ರಾಜಸ್ಥಾನ, ಛತ್ತೀಸಗಢ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇಂದಿಗೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿಗೊಳಿಸಲಾಗಿದೆ. ಅಲ್ಲದೇ ತೆಲಂಗಾಣದಲ್ಲಿ ಎನ್ಪಿಎಸ್ಗೆ ಬದಲಾಗಿ ಸಿಪಿಎಸ್ ವ್ಯವಸ್ಥೆ ಜಾರಿಯಲ್ಲಿದ್ದು, ಈಗ ಗ್ಯಾರಂಟಿ ಪೆನ್ಷನ್ ಸ್ಕೀಂ ಆಗಿ ಪರಿವರ್ತನೆಯಾಗಿದೆ.
ಇದನ್ನೂ ಓದಿ: ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಅನ್ನಭಾಗ್ಯ ಅಕ್ಕಿ : ಬೇರೆ ರಾಜ್ಯಗಳಿಗೂ ರಫ್ತು
ಇದು ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕವೂ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ರಾಜ್ಯ ಸರ್ಕಾರದಲ್ಲಿ ಪ್ರಸ್ತುತ 2.76 ಲಕ್ಷ ಖಾಲಿ ಹುದ್ದೆ ಇದೆ. ಇದರಿಂದ 1914 ಕೋಟಿ ರೂಪಾಯಿ ಎನ್ಪಿಎಸ್ ಉಳಿತಾಯವಾಗುತ್ತಿದೆ.ಎನ್ಪಿಎಸ್ನಲ್ಲಿ ಯಾವುದೇ ಆರ್ಥಿಕ ಭದ್ರತೆ ಇಲ್ಲದ ಕಾರಣ ನಮಗೆ ಹಳೆಯ ಪಿಂಚಣಿ ಯೋಜನಯೇ ಬೇಕಿದೆ. ಇಲ್ಲವಾದಲ್ಲಿ ಹೋರಾಟದ ಹಾದಿ ತುಳಿಯುತ್ತೇವೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ.



