ಕಾಸರಗೋಡು ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಭಾಷೆ : ಕೇರಳದ ವಿರುದ್ಧ ರಾಜ್ಯ ಸರ್ಕಾರ ಸಮರ
ಕಾಸರಗೋಡು ವಿಚಾರದಲ್ಲಿ ಕರ್ನಾಟಕ ಹಾಗೂ ಕೇರಳ ಮತ್ತೊಮ್ಮೆ ಜಟಾಪಟಿಗೆ ಇಳಿದಿವೆ. ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕೆಂದು ಕೇರಳ ಮಸೂದೆ ತಂದಿದೆ. ಇದಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಕೇರಳ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಶೀಘ್ರದಲ್ಲಿಯೇ ರಾಷ್ಟ್ರಪತಿಗಳ ಬಳಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ .
ಈ ಮಸೂದೆಯು ಕಾಸರಗೋಡಿನಲ್ಲಿರುವ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿದೆ. ಕಾಸರಗೋಡಿನಲ್ಲಿ 7.5 ಲಕ್ಷ ಕನ್ನಡಿಗರಿದ್ದು, 210 ಕನ್ನಡ ಮಾಧ್ಯಮ ಶಾಲೆಗಳಿವೆ. ಸಂವಿಧಾನದ 350ಬಿ ವಿಧಿಯ ನಿಬಂಧನೆಗಳಡಿ, ಕೇರಳ ಸರ್ಕಾರ ಕಳುಹಿಸಿರುವ ಮಸೂದೆಗೆ ಅನುಮೋದನೆ ನೀಡದಂತೆ ರಾಷ್ಟ್ರಪತಿಗೆ ಮನವಿ ಮಾಡಲಾಗುವುದು ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಇದನ್ನೂ ಓದಿ: ‘ರಾಜ್ಯದಲ್ಲಿ ಸಿಎಂಗೊಂದು ಕಾನೂನು ಶಾಸಕರಿಗೊಂದು ಕಾನೂನಿದ್ಯಾ’ : ನಳೀನ್ ಕುಮಾರ್ ಕಟೀಲ್ ಕಿಡಿ
ಇನ್ನು ಈ ವಿಚಾರವಾಗಿ ಕೇರಳ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಗಡಿ ಭಾಗದಲ್ಲಿ ಮಲಯಾಳಂ, ಕನ್ನಡ, ತುಳು, ಬ್ಯಾರಿ ಸೇರಿದಂತೆ ಹಲವು ಭಾಷೆಗಳನ್ನು ಮಾತನಾಡುವವರಿದ್ದಾರೆ. ಮಲಯಾಳಂ ಹೇರಿಕೆಯಿಂದ ಮಕ್ಕಳ ಮೇಲೆ ಭಾಷಾ ಹೊರೆಯಾಗಲಿದೆ. ಹೀಗಾಗಿ ಈ ಮಸೂದೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಸಾಂವಿಧಾನಿಕ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.



