ದ.ಕ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಹೊಸ ಮುಖ : ಪುತ್ತೂರು, ಬಂಟ್ವಾಳ ಸೇರಿ ಕಾಂಗ್ರೆಸ್ ನಲ್ಲಿ ಹಳಬರಿಗಿಲ್ಲ ಟಿಕೇಟ್ !

ಮಂಗಳೂರು : MLA Election Ticket Congress : ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಈ ಬಾರಿ ಹೊಸ ಮುಖಗಳಿಗೆ ಮಣೆಹಾಕಲು ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲ ಕ್ಷೇತ್ರ ಹೊರತು ಪಡಿಸಿ ಉಳಿದ ಕ್ಷೇತ್ರಗಳಲ್ಲಿ ಹಳಬರಿಗೆ ಟಿಕೆಟ್ ನೀಡದಿರಲು ಪಕ್ಷ ಚಿಂತನೆ ನಡೆಸಿದೆ. ಜೊತೆಗೆ ಹೊಸಮುಖಗಳನ್ನು ಕಣಕ್ಕಿಳಿಸಲು ಪಟ್ಟಿ ಸಿದ್ದಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ರೆ ಕಳೆದ ಬಾರಿಯ ಚುನಾವಣೆಯಲ್ಲಿ ಉಳ್ಳಾಲ ಶಾಸಕ ಯು.ಟಿ.ಖಾದರ್ ಅವರನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿತ್ತು. ಕಾಂಗ್ರೆಸ್ ಹಳೆಯ ಹುಲಿ ಬಿ.ರಮಾನಾಥ ರೈ, ವಸಂತ ಬಂಗೇರ ಸೋಲು ಕಂಡಿದ್ದರು. ಬಿಜೆಪಿ ಬಹುತೇಕ ಹೊಸ ಮುಖಗಳನ್ನೇ ಕಣಕ್ಕೆ ಇಳಿಸಿ ಭರ್ಜರಿ ಗೆಲುವು ದಾಖಲಿಸಿತ್ತು. ಆದ್ರೀಗ ಕಾಂಗ್ರೆಸ್ ಹಳೆಯ ಲೆಕ್ಕಾಚಾರಗಳನ್ನು ಬದಿಗಿಟ್ಟು ಹೊಸ ಮುಖಗಳನ್ನು ಚುನಾವಣಾ ಕಣಕ್ಕೆ ಇಳಿಸಲು ಮುಂದಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ. ಹೀಗಾಗಿ ಕ್ಷೇತ್ರದಲ್ಲೀಗ ಅನಿತಾ ಹೇಮನಾಥ ಶೆಟ್ಟಿ ಹಾಗೂ ಹೊಸ ಮುಖ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡುವ ಕುರಿತು ಗಂಭೀರ ಚಿಂತನೆಯನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಟಿಕೆಟ್ ಸಿಗುವುದು ಖಚಿತ ಇಲ್ಲ. ಈ ಕ್ಷೇತ್ರದಲ್ಲೀಗ ಹೊಸಮುಖ ರಕ್ಷಿತ್ ಶಿವರಾಮ್ ಹೆಸರು ಹೈಕಮಾಂಡಿನ ಗಂಭೀರ ಪರಿಶೀಲನೆಯಲ್ಲಿ ಇದೆ ಎನ್ನಲಾಗಿದೆ.

ಪ್ರತೀ ಚುನಾವಣೆಯಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯ ಹೈವೋಲ್ಟಜ್ ಕ್ಷೇತ್ರ ಎನಿಸಿಕೊಂಡಿರುವ ಬಂಟ್ವಾಳ ಕ್ಷೇತ್ರದಲ್ಲೀಗ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲು ಸಜ್ಜಾಗಿದೆ. ಪ್ರಮುಖವಾಗಿ ಕ್ಷೇತ್ರದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಿನ್ ಕುಮಾರ್ ರೈ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಅಂಗಳದಲ್ಲಿ ಚರ್ಚೆ ನಡೆದಿದೆ.ಇನ್ನು ಮಂಗಳೂರು ಉತ್ತರ ಕ್ಷೇತ್ರದಲ್ಲಿಯೂ ಬದಲಾವಣೆಯ ಗಾಳಿ ಬೀಸಿದೆ. ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಅನುಮಾನ. ಹೀಗಾಗಿ ಕ್ಷೇತ್ರದಲ್ಲಿ ಉದ್ಯಮಿ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲು ಪಕ್ಷ ಮುಂದಾಗಿದೆ ಎನ್ನಲಾಗುತ್ತಿದೆ.

ಮೂಡುಬಿದ್ರಿ ಕ್ಷೇತ್ರದಲ್ಲಿ ಮಾಜಿ ಶಾಸಕ ಅಭಯ್ ಚಂದ್ರ ಜೈನ್ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಅವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಅಭ್ಯರ್ಥಿ ರಘು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.ಈ ಕ್ಷೇತ್ರದಲ್ಲಿ ಯುವ ಮುಖ ನಂದಕುಮಾರ್ ಹಾಗೂ ಕೃಷ್ಣಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎನ್ನಲಾಗಿದೆ.

ಇನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆ ಆರ್ ಲೋಬೊ ಹೆಸರು ಸ್ಪರ್ಧೆಯಲ್ಲಿದೆ. ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಹೆಸರು ಕೂಡ ಕೇಳಿಬರುತ್ತಿದೆ. ಈ ಇಬ್ಬರಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ಸಾಧ್ಯತೆಯಿದೆ. ಆದ್ರೆ ಉಳ್ಳಾಲ ಕ್ಷೇತ್ರದಲ್ಲಿ ಯಾವುದೇ ಹೊಸ ಹೆಸರುಗಳು ಕೇಳಿಬರುತ್ತಿಲ್ಲ. ಬದಲಾಗಿ ಹಾಲಿ ಶಾಸಕ ಯು.ಟಿ.ಖಾದರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಖಚಿತವಾಗಿದೆ. ಕರ್ನಾಟಕದ ಸುಮಾರು 150 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹೊಸ ಮುಖಗಳನ್ನು ಕಣಕ್ಕೆ ಇಳಿಸಲು ರಾಹುಲ್ ಗಾಂಧಿ ಸಜ್ಜಾಗಿದ್ದಾರೆ. ಇದೇ ಕಾರಣದಿಂದಲೇ ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎನ್ನುತ್ತಿದೆ ಕಾಂಗ್ರೆಸ್‌ ಪಕ್ಷದ ಮೂಲಗಳು.

ಇದನ್ನೂ ಓದಿ : Siddaramaiah’s contest from Kolar :ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ದೃಢ : ಮುಂದಿನ ತಿಂಗಳಿನಿಂದಲೇ ಪ್ರಚಾರ ಕಾರ್ಯ

ಇದನ್ನೂ ಓದಿ : Bande mutt Seer Basavalinga Swamiji : ಹನಿಟ್ರ್ಯಾಪ್ ನಿಂದ ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ : ಕಣ್ಣೂರು ಮಠದ ಸ್ವಾಮೀಜಿ, ಯುವತಿ ಅರೆಸ್ಟ್

MLA Election Ticket for new faces in Congress party, new candidates for Puttur and Bantwal

Comments are closed.