ಸೆಖೆಯಿಂದ ಕಂಗಾಲಾದವರಿಗೆ ವರುಣನ ಸಿಂಚನ : ಉತ್ತರ ಕರ್ನಾಟಕದಿಂದ ಕರಾವಳಿಯವರೆಗೆ ಇರಲಿದೆ ಮಳೆರಾಯನ ದರ್ಬಾರ್
ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿ ನೀಡಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಕರಾವಳಿಯ ಉದ್ದಗಲಕ್ಕೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಈ ಮೂರೂ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಸಮುದ್ರ ತೀರದ ಜನತೆ ಮತ್ತು ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗಾಳಿಯ ಪ್ರಭಾವದಿಂದ ಗುಡುಗು ಮತ್ತು ಮಿಂಚಿನ ಆರ್ಭಟ ಹೆಚ್ಚಿರಲಿದೆ.
ಕರಾವಳಿ ಮಾತ್ರವಲ್ಲದೆ, ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ವಿಶೇಷವಾಗಿ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಂಜೆ ವೇಳೆ ಭಾರಿ ಮಳೆಯ ಮುನ್ಸೂಚನೆ ಇದೆ. ಏಪ್ರಿಲ್ 23ರಂದು ಕೂಡ ಕರಾವಳಿ ಮತ್ತು ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಹೀಟ್ ಸ್ಟ್ರೋಕ್ಗೆ ಮತ್ತೊಂದು ಬಲಿ : ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಾವು
ಗಡಿ ಜಿಲ್ಲೆಯಾದ ಕಾಸರಗೋಡು ಮತ್ತು ದಕ್ಷಿಣ ಕನ್ನಡದ ಗಡಿ ಭಾಗಗಳಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಸಿಲಿನ ತಾಪವಿದ್ದರೂ, ಗಾಳಿಯ ವೇಗ ಹೆಚ್ಚಾಗಿರುವುದರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳ ಕಾಲ ಮಳೆಯ ವಾತಾವರಣ ಇರಲಿದೆ. ಇದು ಕೃಷಿಕರಿಗೆ ಹರ್ಷ ತಂದಿದ್ದರೂ, ಗುಡುಗು ಮತ್ತು ಮಿಂಚಿನ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ನಿಲ್ಲದಂತೆ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ನೀಡಿವೆ.



