ಕರಾವಳಿಯಲ್ಲಿ ಭಾರೀ ಮಳೆ : ಮುಂದಿನ 2 ದಿನಗಳ ಕಾಲ ಹವಾಮಾನ ಇಲಾಖೆಯಿಂದದ ಹೈ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ 48 ಗಂಟೆಗಳ ಕಾಲ ಕರ್ನಾಟಕದಾದ್ಯಂತ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ / ಮಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ 48 ಗಂಟೆಗಳ ಕಾಲ ಕರ್ನಾಟಕದಾದ್ಯಂತ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಮಾರುತಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ತೀರದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ ಗರಿಷ್ಠ 11 ಸೆಂಟಿಮೀಟರ್ ಹಾಗೂ ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 10 ಸೆಂಟಿಮೀಟರ್ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದರೊಂದಿಗೆ ಸುಬ್ರಹ್ಮಣ್ಯ, ಬೆಳ್ತಂಗಡಿ, ಕೆಂಭಾವಿ ಹಾಗೂ ಮಂಗಳೂರು ವೀಕ್ಷಣಾಲಯ ವ್ಯಾಪ್ತಿಯಲ್ಲಿ ಸರಾಸರಿ 7 ಸೆಂಟಿಮೀಟರ್‌ಗಿಂತ ಹೆಚ್ಚು ಮಳೆಯಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.

ಇತ್ತ ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲೂ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ.

ಜುಲೈ 22ರಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಇದೇ ರೀತಿಯ ತಂಪಾದ ಹವಾಮಾನ ಪರಿಸ್ಥಿತಿ ಇರಲಿದ್ದು, ಮಳೆ ಮುಂದುವರಿಯಲಿದೆ. ಕರಾವಳಿ ತೀರ ಹಾಗೂ ಒಳನಾಡಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಮತ್ತು ಮರಗಳ ಆಸುಪಾಸಿನಲ್ಲಿ ಸಂಚರಿಸುವ ವಾಹನ ಸವಾರರು ಬಿರುಗಾಳಿಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Heavy rain in the coastal region Meteorological Department issues high alert for the next two days

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »