ಅನಂತಪದ್ಮನಾಭ ದೇಗುಲದ ಆಡಳಿತಾಧಿಕಾರಿ ನೇಮಕ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅನಂತಶಯನ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆಡಳಿತಾಧಿಕಾರಿ ನೇಮಕ ಮಾಡಿರುವ ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಎದುರಾಗಿದೆ. ಆಡಳಿತಾಧಿಕಾರಿ ನೇಮಕ ಮಾಡಿರುವ ಕುರಿತು ರಾಜ್ಯ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದೆ.
2002 ರಲ್ಲಿ ದೇವಸ್ಥಾನದ ಮೊಕ್ತೇಸರರಾಗಿ ಆಯ್ಕೆಯಾಗಿರುವ ಕಾರ್ಕಳದ ವೇದವ್ಯಾಸ್ ಭಟ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಉಡುಪಿ ಜಿಲ್ಲೆಯ ಸಹಾಯಕ ಆಯುಕ್ತರು, ಉಪ ಆಯುಕ್ತರು ಮತ್ತು ಆಡಳಿತಾಧಿಕಾರಿಗೆ ನೋಟಿಸ್ ಜಾರಿಮಾಡಲಾಗಿದೆ.
2002ರಲ್ಲಿ ಈ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚನೆಯಾಗಿತ್ತು. 2012ರಲ್ಲಿ ಈ ದೇವಸ್ಥಾನವನ್ನು ಮುಜರಾಯಿ ವ್ಯಾಪ್ತಿಯಿಂದ ಹೊರಗಿಡಲು ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ ಬಳಿಕ ಸ್ಥಳೀಯರ ನಡುವೆ ವ್ಯಾಜ್ಯ ಉಂಟಾದ ಪರಿಣಾಮ 2018ರಲ್ಲಿ ಆಡಳಿತಾಧಿಕಾರಿ ನೇಮಕಗೊಂಡಿದ್ದರು. ಈ ವಿವಾದ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಇದು ಮಾತ್ರವಲ್ಲದೇ ವ್ಯವಸ್ಥಾಪನಾ ಮಂಡಳಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ ಮಾಡಿದ ವಿಚಾರ ಕೂಡ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಈ ಎಲ್ಲಾ ಗೊಂದಲಗಳ ನಡುವೆ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರಕ್ಕೆ ಇದೀಗ ನೋಟಿಸ್ ಜಾರಿಯಾಗಿದೆ.



