ಕಾರ್ಕಳ ಅಂಬೇಡ್ಕರ್ ಭವನ ಲೋಕಾರ್ಪಣೆ, ಶಾಸಕ ಸುನೀಲ್ ಕುಮಾರ್ ಫೋಟೋಗೆ ಕತ್ತರಿ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ
ಕಾರ್ಕಳ : ನಿನ್ನೆ ಕಾರ್ಕಳಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಬೆಟ್ಟುವಿನಲ್ಲಿ ಸುಮಾರು 6 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನೆ ಮಾಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬ್ಯಾನರ್ ಗಲಾಟೆ ಭಾರೀ ಸದ್ದು ಮಾಡ್ತಿದೆ. ಅಂಬೇಡ್ಕರ್ ಭವನ ಲೋಕಾರ್ಪಣೆಯ ಬ್ಯಾನರ್ನಲ್ಲಿ ರಾಜಕಾರಣ ಮಾಡಲಾಗಿದೆಯಾ ಎಂಬ ಅನುಮಾನ ಮೂಡಿದೆ.
ಡಾ.ಬಿ.ಆರ್ ಅಂಬೇಡ್ಕರ್ ಸಭಾಭವನದ ಮುಂಭಾಗದಲ್ಲಿ ಹಾಕಲಾಗಿದ್ದ ಬ್ಯಾನರ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ರಾಜ್ಯ ಸರ್ಕಾರದ ಅಡಿಯಲ್ಲಿ ನಡೆಸಲಾಗುತ್ತಿರುವ ಕಾರ್ಯಕ್ರಮವಾಗಿದ್ದರೂ ಸಹ ಸ್ಥಳೀಯ ಶಾಸಕ ವಿ.ಸುನೀಲ್ ಕುಮಾರ್ ಅವರ ಫೋಟೋವೇ ಮಾಯವಾಗಿರುವುದು ದೊಡ್ಡ ಮಟ್ಟದಲ್ಲಿ ವಿವಾದ ಮೂಡಿಸಿದೆ.

ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಸಮುದಾಯ ಭವನಕ್ಕೆ ಅಂದಿನ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಅನುದಾನ ಒದಗಿಸಿದ್ದರು. ಈ ಅಂಬೇಡ್ಕರ್ ಭವನಕ್ಕೆ ಅನುದಾನ ದೊರೆಯುವಂತೆ ಮಾಡುವಲ್ಲಿ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮಹತ್ವದ ಪಾತ್ರ ವಹಿಸಿದ್ದರು. ಆದರೆ ಬ್ಯಾನರ್ನಲ್ಲಿ ಇವರಿಬ್ಬರ ಫೊಟೋವೇ ಮಾಯವಾಗಿದೆ. ಅದರಲ್ಲೂ ವಿಶೇಷವಾಗಿ ಸ್ಥಳೀಯ ಶಾಸಕರ ಫೋಟೋವನ್ನೇ ತೆಗೆದುಹಾಕಿರುವ ಕಾಂಗ್ರೆಸ್ ಸರ್ಕಾರದ ನಡೆ ತೀವ್ರ ಅಸಮಾಧಾನಕ್ಕೆ ದಾರಿ ಮಾಡಿದೆ.
ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪೆಟ್ಟು : ಡಿಸಿಎಂ ಡಿ.ಕೆ ಶಿವಕುಮಾರ್
ಸಾಮಾಜಿಕ ಜಾಲತಾಣಗಳಲ್ಲಿ ಈ ಬ್ಯಾನರ್ ಫೋಟೋವನ್ನು ಹರಿಬಿಡಲಾಗಿದ್ದು, ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅಂಟಿಸಿದ ಬ್ಯಾನರ್ನಲ್ಲಿ ಸ್ಥಳೀಯ ಶಾಸಕರ ಫೊಟೋವನ್ನು ತೆಗೆದುಹಾಕಿರುವುದು ಶಿಷ್ಟಾಚಾರ ಉಲ್ಲಂಘನೆ ಅಲ್ಲವೇ? ಕಾರ್ಕಳದಲ್ಲಿ ನಿನ್ನೆ ನಡೆದಿರುವುದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ? ಸರ್ಕಾರಿ ಕಾಮಗಾರಿಗಳ ಲೋಕಾರ್ಪಣೆಯಲ್ಲಿಯೂ ಕಾಂಗ್ರೆಸ್ ತನ್ನ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಬಿಜೆಪಿ ಬೆಂಬಲಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.



